Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ನವಲಿ ಅಣೆಕಟ್ಟು; ತಿಂಗಳೊಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ನವಲಿ ಅಣೆಕಟ್ಟು; ತಿಂಗಳೊಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಯಚೂರು,:- ನವಲಿ ಅಣೆಕಟ್ಟು ನಿರ್ಮಾಣ ಸಂಬಂಧ ಮುಂದಿನ ಒಂದು ತಿಂಗಳ ಒಳಗಾಗಿ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗುವುದು” ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿಂಧನೂರು ನಗರದ ಎ.ಪಿ.ಎಮ್.ಸಿ ಆವರಣದಲ್ಲಿ ನಗರಸಭೆ, ನಗರ ಯೋಜನಾ ಪ್ರಾಧಿಕಾರ, ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ತುಂಗಾಭದ್ರ ಅಣೆಕಟ್ಟಿಗೆ ಪರ್ಯಾಯವಾಗಿ ನವಲಿಯಲ್ಲಿ ಅಣೆಕಟ್ಟು ನಿರ್ಮಾಣಮಾಡಬೇಕು ಎಂದು ಈ ಭಾಗದ ನಾಯಕರು ಮನವಿ ನೀಡಿದ್ದಾರೆ. ಅಲ್ಲದೆ 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಮೂರೂ ರಾಜ್ಯದ ನಾಯಕರ ಜತೆ ಚರ್ಚೆ ಮಾಡಿ ಆದಷ್ಟು ಬೇಗ ಈ ಯೋಜನೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತುಂಗಾಭದ್ರ ಅಣೆಕಟ್ಟು ಗೇಟ್ ಬದಲಿಗೆ ಕ್ರಮ:ನಮ್ಮ ತಜ್ಞರ ಸಮಿತಿಯು ಈ ಅಣೆಕಟ್ಟಿನ ಗೇಟ್ ಗಳ ಬದಲಾವಣೆ ಮಾಡಬೇಕು ಎಂದು ವರದಿ ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಮಂತ್ರಿಗಳು, ಸಂಸದರು, ಶಾಸಕರ ಜತೆ ಚರ್ಚೆ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಎಲ್ಲಾ ಗೇಟ್ ಗಳನ್ನು ಪರಿಶೀಲನೆ ಮಾಡಿ, ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಬಳಿಕ ಒಂದೊಂದೇ ಗೇಟ್ ಗಳನ್ನು ಬದಲಾವಣೆ ಮಾಡುತ್ತೇವೆ. ಆ ಮೂಲಕ ಈ ಅಣೆಕಟ್ಟು, ರೈತರ ಬದುಕು ಉಳಿಸಲು ಈ ಸರ್ಕಾರ ಬದ್ದವಾಗಿದೆ ಎಂದರು.

ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯವನ್ನು ದೇಶವೇ ನೋಡಿತ್ತು. ತುಂಗಾಭದ್ರ ಅಣೆಕಟ್ಟು ನಿರ್ಮಾಣ ಮಾಡಿ 70 ವರ್ಷ ಕಳೆದಿವೆ. ಈ ಅಣೆಕಟ್ಟಿನ ಒಂದು ಗೇಟ್ ಕಿತ್ತುಹೋಯಿತು. ಇದನ್ನು ಒಂದು ವಾರದಲ್ಲಿ ದುರಸ್ತಿ ಮಾಡಬೇಕು ಎಂಬ ಸಂಕಲ್ಪ ಮಾಡಿದ ನಿರ್ಧಾರ ಮಹತ್ವದ್ದಾಗಿತ್ತು. ಆ ಸಂದರ್ಭದಲ್ಲಿ ಅನೇಕ ಟೀಕೆ ಮಾಡಿದ್ದರು. ಆಗ ನಾನು ನೀವು ಏನಾದರೂ ಟೀಕೆ ಮಾಡಿ, ಟೀಕೆ ಸಾಯುತ್ತವೆ, ಕೆಲಸ ಉಳಿಯುತ್ತವೆ ಎಂದು ಹೇಳಿದೆ.

ನಾನು ಕೂಡಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿ ತ್ವರಿತಗತಿಯಲ್ಲಿ ಕಾರ್ಯಪ್ರವೃತ್ತವಾಗುವಂತೆ ಮಾಡಿದೆ. ಈ ಅಣೆಕಟ್ಟು ಉಳಿಯುತ್ತದೆಯೋ, ಒಡೆದುಹೋಗುತ್ತದೆಯೋ? ಈ ಸಮಸ್ಯೆಯನ್ನು ಕರ್ನಾಟಕ ಸರ್ಕಾರ ಹೇಗೆ ಬಗೆಹರಿಸಲಿದೆ ಎಂದು ಇಡೀ ದೇಶದ ಜನ ಈ ಕಾರ್ಯವನ್ನು ಕುತೂಹಲದಿಂದ ನೋಡುತ್ತಿದ್ದರು. ನನಗೆ ನೂರಾರು ಕರೆ ಬಂದಿತ್ತು. ನಾವು ಮಾಡುವ ಕೆಲಸ ಸರಿಯಾದ ರೀತಿಯಲ್ಲಿ ಮಾಡಬೇಕು. ಹುಳಿ ಪೆಟ್ಟು ಬೀಳದೆ ಯಾವ ಕಲ್ಲು ಶಿಲೆಯಾಗುವುದಿಲ್ಲ. ಅದೇ ರೀತಿ ನೇಗಿಲು ಉಳುಮೆ ಮಾಡದೇ ಫಲ ದೊರೆಯುವುದಿಲ್ಲ. ಶ್ರಮ ಇಲ್ಲದೆ ಫಲ ಇರುವುದಿಲ್ಲ. ಅದೇ ರೀತಿ ನಮ್ಮ ಅನುಭವ, ಛಲ ದಿಟ್ಟ ನಿರ್ಧಾರ ಇಂದು ಸಾಧನೆಯಾಗಿ ನಿಂತಿದೆ. ನಂತರ ನಾವು ಅದೇ ಅಣೆಕಟ್ಟಿನಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ಮಾಡಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ,ಹಿಂದುಳಿದ ವರ್ಗಗಳು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಮಸ್ಕಿ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕೊಪ್ಪಳ ಕ್ಷೇತ್ರದ ಶಾಸಕರಾದ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪೂರ, ಬಸನಗೌಡ ಬಾದರ್ಲಿ, ಕೊಪ್ಪಳ ಶಾಸಕ ರಾಘವೇಂದ್ರ, ಶಿರುಗುಪ್ಪ ಶಾಸಕ ನಾಗರಾಜ್, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ ಸೇರಿದಂತೆ‌ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Megha News