ರಾಯಚೂರು: ಜೂ.2 ಜಿಲ್ಲೆಯಲ್ಲಿ ಬಾಲ್ಯವಿವಾಹ ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಇದಕ್ಕೆ ಸಹಕರಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ ಕ್ರಮ ಜುರುಗಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ತುಕಾರಾಮ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಸೋಮವಾರದಂದು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಭೇಟೆ ನೀಡಿ ಸಿಡಿಪಿಒಗಳು, ಮಹಿಳಾ ಕಲ್ಯಾಣ ಅಧಿಕಾರಿ, ಮಕ್ಕಳ ರಕ್ಷಣಾ ಅಧಿಕಾರಿಗಳೊಂದಿಗೆ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲು ಇಲಾಖೆಯ ಅಧಿಕಾರಿಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇದುವರೆಗೂ ಈ ಪ್ರಕರಣಗಳನ್ನು ತಡೆಯಲು ಯಾವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವದರ ಬಗ್ಗೆ ಮಾಹಿತಿ ಪಡೆದುಕೊಂಡರು. SAM ಮತ್ತು MAM ಪ್ರಕರಣಗಳನ್ನು ಕಡಿತಗೊಳಿಸಲು ರೂಪಸಿಲಾಗಿರುವ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಹದಿಹರೆಯದವರ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ ಪೂರೈಕೆ ಮಾಡಬೇಕು. ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ನಿವೇಶನ ಒದಗಿಸಲು ಆಯಾ ಗ್ರಾಮ ಪಂಚಾಯತಿಗಳು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು. ಅಂಗನವಾಡಿ ಕೇಂದ್ರಗಳಿಗೆ ಕಾಂಪೌಂಡ್ ವ್ಯವಸ್ಥೆ ಕಲ್ಪಿಸಬೇಕೆಂದು ಇಲಾಖೆಯ ಅಧಿಕಾರಿಗಳು ಮಾನ್ಯ ಸಿಇಓ ರವರ ಗಮನಕ್ಕೆ ತಂದರು.
ತೀವ್ರ ಹಾಗೂ ಸಾಧಾರಣ ಅಪೌಷ್ಟಿಕತೆ ಯಿಂದ ಬಳಲುತ್ತಿರುವ ಮಕ್ಕಳ ಆರೈಕೆ ಹಾಗೂ ಅಪೌಷ್ಟಿಕತೆ ನಿವಾರಣಾ ಕ್ರಮಗಳ ಬಗ್ಗೆ ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು. ಪಾಲಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಬೇಕು ಹಾಗೂ ನ್ಯೂಟ್ರಿಷನ್ ಪುನರ್ವಸತಿ ಕೇಂದ್ರ (NRC) ಗಳನ್ನು ಬಲಪಡಿಸಬೇಕೆಂದರು .
ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಜವಾಬ್ದಾರಿ ಹೆಚ್ಚು ಇದೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ, ಆತ್ಮಸಾಕ್ಷಿಯಾಗಿ ಕರ್ತವ್ಯಗಳನ್ನು ನಿರ್ವಹಿಸಲು ತಿಳಿಸಿದರು. ಅಂಗನವಾಡಿ ಕೇಂದ್ರಗಳನ್ನು ಶುಚಿಯಾಗಿಡಲು ಹಾಗೂ ಕೇಂದ್ರಗಳನ್ನು ಆಕರ್ಷಕವಾಗಿ ನಿರ್ವಹಿಸುವ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ನೀಡುವ ಬಗ್ಗೆ ಕ್ರಮ ಜರುಗಿಸುವುದಾಗಿ ಸಿಡಿಪಿಒಗಳಿಗೆ ತಿಳಿಸಲಾಯಿತು.